ನಾಟಕ ರಂಗದಲಿ ನಟಶಿರೋಮಣಿಯೊಬ್ಬ vidyaprasanna teertharu nataka rangadali nata shiromaniyobba
Restart mobile & try if the above audio is not playing
ಶ್ರೀ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾ ಪ್ರಸನ್ನತೀರ್ಥ ಶ್ರೀಪಾದಂಗಳವರು ರಚಿಸಿರುವ ಸಂಕ್ಷಿಪ್ತ ಶ್ರೀನಿವಾಸ ಕಲ್ಯಾಣ .
ರಾಗ : ಆನಂದಭೈರವಿ
ನಾಟಕ ರಂಗದಲಿ ನಟಶಿರೋಮಣಿಯೊಬ್ಬ|
ಪಟುತನದಿ ವಿಧವಿಧದ ನಟನೆಗಳ ತೋರುವನು ||ಪ||
ಅಘಟನಾಘಟನ ಶಕ್ತನ ಕಪಟನಾಟಕವು|
ಘಟಕರಲ್ಲದ ಜನಕೆ ಎಟುಕದಾನೋಟ ||ಅ.ಪ||
ಮುಖ್ಯಪಾತ್ರವು ನಮ್ಮ ರುಕ್ಮಿಣಿ ರಮಣನದು |
ಮುಖ್ಯತಾರೆಯು ಲೋಕ ಜನನಿ ಲಕುಮಿ ||
ಇಕ್ಕಿದನು ಗೋರೂಪ ಚತುರಾನನನು ಮುದದಿ |
ಮುಖ್ಯಪ್ರಾಣನೆ ತುರಗ ಮುಕ್ಕಣ್ಣ ಕರುವಾದ ||1||
ಸುಖಸಾರನನು ಪಡೆದು ಧನ್ಯಳಾದ ಯಶೋದೆ|
ಬಕುಳೆಯೆ ತಾನಾದಳೀ ನಾಟಕದಲಿ||
ಅಕಳಂಕ ಮಹಿಮನನು ಅಗಲದಿದ್ದ ಸತಿಯು|
ಮುಖನೋಡಿ ಕೋಪದಲಿ ಕಲ್ಲುಗಳನೆಸೆದಳು ||2||
ಸರ್ವತ್ರ ವ್ಯಾಪ್ತನಿಗೆ ಇರಲು ಜಾಗವು ಸಿಗದೆ|
ಕಿರಿದ ತಾ ಹಲ್ಲುಗಳ ವರಹನಲ್ಲಿ||
ಹರನ ತಾತನು ತಾನು ಸ್ಮರನ ಬಾಣದಿ ನೊಂದ|
ಸುರಮೋಹಿನಿಯು ಇಂಥ ಕೊರವಂಜಿಯಾದಳು ||3||
ಹುಟ್ಟಿಸುವ ಬೊಮ್ಮನನು ಪುಟ್ಟ ಶಿಶುವನೆ ಮಾಡಿ|
ಹೊಟ್ಟೆಗಿಲ್ಲದೆ ಬಹಳ ಬಾಡಿ ಇರಲು||
ಮೃಷ್ಟಾನ್ನವನು ಚಿನ್ನ ತಟ್ಟೆಯಲಿ ತಂದಿಡಲು|
ಶ್ರೇಷ್ಠವಿದು ಜನನಿಗೆನ್ನುತ ತಿಂದು ತೇಗಿದಳು ||4||
ಬಡುಕನೆದೆಗೊದೆಯಲವನಡಿಗಳಿಗೆ ಶರಣೆಂದ|
ಕಡು ಕೋಪಿ ಗೋವಳನ ಕೊಡಲಿಗೊಡ್ಡಿದ ಶಿರವ||
ಹಿಡಿ ಮಣ್ಣು ಪಿಂಡಗಳನಿತ್ತ ಚಂಡಾಲನಿಗೆ|
ಸಡಗರದಿ ಲಕುಮಿಯನೇ ಕರದಲಿತ್ತ ಪ್ರಸನ್ನ ||5||
**
Comments
Post a Comment